ಹೆದ್ದಾರಿಯಿಂದ ಸ್ವಲ್ಪದೂರದಲ್ಲಿ ಬೆಟ್ಟ, ಕಾನು, ಘಟ್ಟದ ರಸ್ತೆ, ಮಳೆ ಇವೆಲ್ಲ ಕಂಡರಿಸಿ ನಿಲ್ಲಿಸಿದ ಪುಟ್ಟ ಚೆಲುವಾದ ಊರು ಕಲಗಾರು. ತಾಳಗುಪ್ಪಾ-ಜೋಗದ ಮಧ್ಯೆ ಸಿಗುವ ಈ ಊರಿನ ಪ್ರಕೃತಿಸಿರಿಯಷ್ಟೇ ಇಷ್ಟವಾಗುವ ಜೀವ ಮಾಧು ಮಾವ. ದಿನದಿನದ ಬದುಕಲ್ಲಿ ಹಣ್ಣಾಗುತ್ತಲೇ ತನ್ನ ಭಾವದೊರತೆಯನ್ನ ಚಿರಂತನವಾಗಿ ಜೀವಂತವಿರಿಸಿಕೊಂಡ ಭಾವಜೀವಿ. ನಿನ್ನೆ ಬೆಂಗಳೂರಿಗೆ ಕೆಲಸದ ಮೇಲೆ ಬಂದಿದ್ದವನ ಕೈಯಲ್ಲಿ ಸಿಕ್ಕ ಕವಿತೆಯ ಪುಸ್ತಕಗಳಲ್ಲಿ ಕಣ್ಣಾಡಿಸಿದವಳಿಗೆ ತುಂಬ ಚೆಲುವಾದ ಕವಿತೆಗಳು ಸಿಕ್ಕಿ ಮನಸ್ಸು ಉಲ್ಲಸಗೊಂಡಿತು. ತನ್ನ ಮನೆ,ತೋಟ ಕೆಲಸಗಳ ನಡುವೆ, ಊರಿನ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚಟುವಟಿಕೆಯಿಂದ ಭಾಗವಹಿಸುವ ಮಾವನ ಓದಿನ ಹರವೂ ಅಪಾರ. ಬೇಲಿಸಾಲಿನ ಹಸಿರ ನಡುವೆ ಕೆಂಪಗೆ ಹೊಳೆವ ಹೂವಿನ ಮಾರ್ದವತೆ ಮೈದಳೆದಿರುವ ಮಾಧು ಮಾವನ ಒಂದು ಭಾವಗೀತವನ್ನ ಇಲ್ಲಿ ನಿಮಗಾಗಿ ಕೊಡುತ್ತಿದ್ದೇನೆ.. ಓದಿ ಏನನ್ನಿಸಿತು ಹೇಳಿ
ಮುಸುಕಿನಲಿ ಆಡಿದ
ಪಿಸುಮಾತು - ಕಿವಿಮಾತು
ಇನಿದನಿಗೆ ಬದಲಾಗಿ
ಕರ್ಕಶದ ಮಾರ್ದನಿಯಾಗದಿರಲೆಂದು
ಮಂಜು ತಬ್ಬಿತು ಬೆಟ್ಟವ
ಮನದ ಮಾತಿಗೆ ಮೌನ
ಮುಳ್ಳಬೇಲಿಯ ಘನವಾಗಿ
ಹೆಪ್ಪುಗಟ್ಟಿದ ಭಾವ
ಶೂನ್ಯದಾಗಸಕೆ ನಿಚ್ಚಣಿಕೆಯಾದಾಗ
ಮಂಜು ತಬ್ಬಿತು ಬೆಟ್ಟವ
ಮುಗ್ಧ ಮುಖದಾವರೆಯ
ಸ್ನಿಗ್ಧ ನಗುವಿನ ಪ್ರಕೃತಿ
ನದಿಯಂಚಿನ ಮರಳು - ಗುಡ್ಡ
ಯಂತ್ರಗಳ ರವದಲ್ಲಿ ಸಿಡಿಸಿಡಿದು ಹೋಳಾಗೆ
ಮಂಜು ತಬ್ಬಿತು ಬೆಟ್ಟವ
ಆಸೆಗಳ ತಿಳಿಗೊಳದಿ
ದುರಾಸೆಗಳ ಅಲೆಮೂಡಿ
ವಾದ ವಿವಾದಗಳ ವಿಷಯ-ವಿಷವಾಗಿ
ತತ್ವಗಳ ಬದುಕಲ್ಲಿ ಕುಹಕ ಬೆಂಕಿಬಲೆ ಹೆಣೆದಾಗ
ಮಂಜು ತಬ್ಬಿತು ಬೆಟ್ಟವ
ಕಾಡ ನಾಡಾಗಿಸುವ
ಕುರುಡು ಹುನ್ನಾರಿಗೆ ಸಿಲುಕಿ
ದುಡಿವ ಜನ - ಮಡಿವ ಜನ
ಇಟ್ಟಂಗಿ ಕಲ್ಲು ಪಾವಟಿಗೆಯಾಗಿ, ಉಳ್ಳವರು ಅಟ್ಟಹಾಸವ ಮಾಡೆ
ಮಂಜು ತಬ್ಬಿತು ಬೆಟ್ಟವ
ನಿನ್ನೆ ನಾಳೆಯ ನಡುವೆ
ಇಂದೆಂಬ ಚಿರಸತ್ಯ
ಯಾರಿರಲಿ ಇಲ್ಲದಿರಲಿ
ನಾನಿದ್ದರಷ್ಟೆ ಸುಖವೆಂಬ ಸ್ವಾರ್ಥ ಸಂತೆಗೆ ಕರಗಿಬೀಳುವ ಮುನ್ನ
ಮಂಜುತಬ್ಬಿತು ಬೆಟ್ಟವ.
-ಮಾಧವ ಶರ್ಮ ಕಲಗಾರು
ನೋಟ್ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ
-
ʼನೋಟ್ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ
ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು
ಧನ್ಯವಾದಗಳನ್ನು ಮ...